ಜಯ ಭಾರತ ಜನನಿಯ ತನುಜಾತೆ

ರಾಷ್ಟ್ರಕವಿ ಕುವೆಂಪು ರಚಿಸಿದ "ಜಯ ಭಾರತ ಜನನಿಯ ತನುಜಾತೆ"ಯು ನಾಡಗೀತೆಯಾಗಿ 2004ರಲ್ಲಿ ಅಂಗೀಕರಿಸಲ್ಪಟ್ಟಿತು.

ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿವನಗಳ ನಾಡೇ, ಜಯ ಹೇ ರಸ ಋಷಿಗಳ ಬೀಡೇ
ಭೂದೇವಿಯ ಮಕುಟದ ನವಮಣಿಯೆ, ಗಂಧದ ಚಂದದ ಹೊನ್ನಿನ ಗಣಿಯೆ
ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ!

ಜನನಿಯ ಜೋಗುಳ ವೇದದ ಘೋಷ, ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ, ಭಾರತ ಜನನಿಯ ತನುಜಾತ!

ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರರಿಹ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ, ಪಂಪ ಲಕುಮಿಪತಿ ಜನ್ನ
ಕಬ್ಬಿಗರುದಿಸಿದ ಮಂಗಳ ಧಾಮ, ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ ಭಾರತ ಜನನಿಯ ತನುಜಾತೆ!

ತೈಲಪ ಹೊಯ್ಸಳರಾಳಿದ ನಾಡೇ, ಡಂಕಣ ಜಕಣರ ನೆಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗ, ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ, ಭಾರತ ಜನನಿಯ ತನುಜಾತೆ!

ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ, ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ದೇಹ, ಕನ್ನಡ ತಾಯಿಯ ಮಕ್ಕಳ ಗೇಹ

ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ